ಹುಣಿಸೇ ಮರವನ್ನು ಮೆಚ್ಚದವರು ಯಾರಿದ್ದಾರೆ? ತುಂಬು ಹೆರಳ ಸುಂದರಿಯ ಹಾಗೆ, ಕಂಗೊಳಿಸುವ ಹುಣಿಸೇಮರವೆಂದರೆ ನನಗಂತೂ ಇಷ್ಟ. ಅದೇ ಕಾರಣಕ್ಕೆ ಹುಣಸೂರು ಕೂಡ. ಮೈಸೂರಿನಿಂದ ಮಡಿಕೇರಿಗೆ ಹೋಗುವಾಗೆಲ್ಲ, ದಾರಿಯುದ್ದಕ್ಕೂ ಅವಧೂತರ ಹಾಗೆ ಸ್ವಸ್ಥ ನಿಂತಿರುವ ಹುಣಿಸೇಮರಗಳು ಖುಷಿ ಕೊಡುತ್ತವೆ. ಆ ಮರದ ಹಸುರೇ ಬೇರೆ, ಕತ್ತಲಾದರೆ ಅದರ ನಿಗೂಢವೇ ಬೇರೆ. ಹುಣಿಸೇಮರದ ಕೊಂಬೆಗಳು ಅದೆಷ್ಟು ಗಟ್ಟಿ ಅಂದರೆ ಕೊಂಬೆಯ ತುದಿಗೆ ಹೋದರೂ ಅದು ಬಾಗುತ್ತದೆಯೇ ಹೊರತು ಮುರಿಯುವುದಿಲ್ಲ. ಹಳ್ಳಿಯ ಶಾಲೆಯ ಮೇಷ್ಟ್ರುಗಳಿಗೆ ತುಂಟ ಮಕ್ಕಳನ್ನು ಹದ್ದುಬಸ್ತಿನಲ್ಲಿಡುವುದಕ್ಕೆ ಹುಣಿಸೆಯ ಬರಲೇ ಪಾಶುಪತಾಸ್ತ್ರ.
ಹುಣಿಸೆಯ ಮರ ಎಲ್ಲಾ ಹಳ್ಳಿಗಳಲ್ಲೂ ಸಾಮಾನ್ಯ. ಹುಣಿಸೇಹಣ್ಣಿನ ಬೆಲೆ ಎಷ್ಟೇ ಆದರೂ ಹುಣಿಸೇಮರವನ್ನು ನಗದು ಬೆಳೆಯಾಗಿ ಬೆಳೆಸಿದವರನ್ನು ನಾನಂತೂ ನೋಡಿಲ್ಲ. ಹುಣಿಸೇ ತೋಟ ಇಟ್ಟುಕೊಂಡಿದ್ದೇನೆ ಅಂತ .ಯಾವೂರ ರೈತನೂ ಹೇಳಿಕೊಂಡಂತಿಲ್ಲ. ಹುಣಿಸೇಹಣ್ಣಿಗೆ ಬೆಂಬಲ ಬೆಲೆ ಘೋಷಿಸಿ ಅಂತ ಗದ್ದಲವಾದದ್ದೂ ಗೊತ್ತಿಲ್ಲ. ಆದರೆ ಚಿತ್ರದುರ್ಗದ ಕಡೆಯ ಗೆಳೆಯರು ಅವರೂರಲ್ಲಿ ಬಂಜರು ಭೂಮಿ ಕೊಡು ಹುಣಿಸೇಮರ ಬಾಕಿ, ಹದಿನೈದೋ ಇಪ್ಪಕ್ಕೋ ವರುಷ, ಫಲಬರುವ ತನಕ ಕಾಯುತ್ತಾರಂತೆ. ಹುಣಿಸೇಮರದ ಲಾಭನಷ್ಟದ ಕತೆ ಹೇಗಾದರೂ ಇರಲಿ. ನಿಮಗೆಂದಾದರೂ ಎಲೆಯುದುರಿಸಿಕೊಂಡು ಬೆತ್ತಲೆ ನಿಂತ ಹುಣಿಸೇಮರ ನೋಡಿದ ನೆನಪಿದೆಯಾ? ನಾನಂತೂ ಎಲೆಯುದುರಿದ ಬೋಳು ಹುಣಿಸೇಮರ ನೋಡಿಲ್ಲ. ಹಾಗೇ ಯೌವನದಿಂದ ನಳನಳಿಸುವ ಹುಣಿಸೇಮರವನ್ನು ಕೂಡ. ಸಾಮಾನ್ಯವಾಗಿ ಎಲ್ಲಾ ಹುಣಿಸೇಮರವೂ ನೂರೋ ನೂರೈವತ್ತೋ ವರುಷವಾದಂತೆ ಋಷಿಗಳ ಹಾಗೆ ಕಾಣಿಸುತ್ತದೆ.
ಹುಣಿಸೇಮರ ಹುಟ್ಟುಹಾಕುವ ಕತೆಗಳಿಗಂತೂ ಲೆಕ್ಕವಿಲ್ಲ. ಅದು ದೆವ್ವಗಳ ಅಡಗುದಾಣ. ಹುಣಿಸೇಮರದಡಿಯಲ್ಲಿ ಮಲಗಿ ಮರಣಹೊಂದಿದವರ ಕತೆಗಳಂತೂ ಪ್ರತಿ ಹಳ್ಳಿಯಲ್ಲೂ ಇವೆ. ಹಳೆಯ ಚಂದಮಾಮಗಳಲ್ಲಂತೂ ಹುಣಿಸೇಮರದ ಜೊತೆ ದೆವ್ವ ಫ್ರೀ. ಬ್ರಹ್ಮರಾಕ್ಷಸನ ಪಾಲಿಗೂ ಹುಣಿಸೇಮರವೇ ಅಂತಃಪುರ. ಆದರೆ, ಹುಣಿಸೇಮರಕ್ಕೆ ನೇಣುಹಾಕಿಕೊಳ್ಳುವವರು ಕಡಿಮೆ. ಅದ್ಯಾಕೋ ಸತ್ತವರ ಪಾಲಿಗೆ ಪ್ರಿಯವಾದಷ್ಟು ಹುಣಿಸೇಮರ ಸಾಯುವವರ ಪಾಲಿಗೆ ಆಪ್ತವಾಗಲಿಲ್ಲ.
ಹಾಗೇ ಕವಿಗಳಿಗೂ ಕಾವ್ಯಕ್ಕೂ ಹುಣಿಸೇಹಣ್ಣು ರುಚಿಸಿದಂತಿಲ್ಲ. ಮರ ಮುಪ್ಪಾದರೆ ಹುಳಿ ಮುಪ್ಪೇ ಎಂಬ ಗಾದೆಗಷ್ಟೇ ಹುಣಿಸೇಮರ ಸೀಮಿತ. ಹುಣಿಸೇಹಣ್ಣು ಕೂಡ ವ್ಯರ್ಥಪ್ರಯತ್ನವನ್ನೂ ಸೂಚಿಸುವ ನುಡಿಗಟ್ಟನ್ನು ಕೊಟ್ಟಿತು. ಹೊಳೆಯಲ್ಲಿ ಹುಣಿಸೇಹಣ್ಣು ತೊಳೆದಂತೆ ಅಂತ ಹಿರಿಯರು ಈಗಲೂ ಹೇಳುವುದುಂಟು. ಇನ್ನೊಬ್ಬನ ಅಭಿವೃದ್ಧಿಯನ್ನು ಕಂಡು ಕರುಬುವವನನ್ನು ಹೊಟ್ಟೆಯಲ್ಲಿ ಹುಣಿಸೇಹಣ್ಣು ಕಿವುಚಿದಂತಾಯಿತು ಅನ್ನುತ್ತಾರೆ. ಅಷ್ಟು ಬಿಟ್ಟರೆ, ಬಸುರಿಯ ಬಯಕೆಗೆ ಮಾವಿನಕಾಯೇ ಬೇಕು. ಅದರ ಬದಲು ಅವರೇಕೆ ಹುಣಿಸೇಕಾಯಿ ಬಯಸರು? ಕವಿಗಳು ಇಷ್ಟೊಂದು ಚೆಂದದ ಮರವನ್ನು ಬಣ್ಣಿಸದೇ ಬಿಟ್ಟರೇಕೆ ಎಂಬ ಪ್ರಶ್ನೆ ಮೂಡುತ್ತಿರುವಾಗಲೇ ಮೊನ್ನೆ ಬೇಂದ್ರೆ ಬರೆದ ಹೂತದ ಹುಣಸೀ’ ಕವಿತೆಯನ್ನು ನೆನಪಿಸಿದರು ಕಿ. ರಂ ನಾಗರಾಜ್. ಕವಿ ಜೀವದ ಬೇಸರ ತಣಿಸೋದಕ್ಕೆ ಬೇರೇನು ಬೇಕು, ಒಂದು ಹೂಬಿಟ್ಟ ಹುಣಿಸೇಮರ ಸಾಕು ಎಂದು ಕೊನೆಯಾಗುವ ಕವಿತೆ ಹುಣಿಸೇಮರದ ಸೊಬಗನ್ನು ವರ್ಣಿಸಿದೆ. ಆ ಕವಿತೆಗಿರುವ ಇನ್ನಿತರ ಅರ್ಥಾಂತರಗಳು ಸದ್ಯಕ್ಕೆ ಬೇಡ.
********
ಕಾವ್ಯ ವಿಮರ್ಶಕರು ಬೇರೆ ಥರ ಬರೆಯುವುದನ್ನು ಕಲಿಯಬೇಕಿದೆ. ಕವಿತೆಯನ್ನು ನಾವು ವಿಶ್ಲೇಷಿಸುವ ಕ್ರಮದಲ್ಲೇ ತಪ್ಪಿದೆ. ಸಂಸ್ಕೃತಿ ವಿಮರ್ಶೆಯ ಹೆಸರಲ್ಲಿ ತಮ್ಮ ತಮ್ಮ ವಾದಗಳನ್ನು ಮಂಡಿಸುವುದಕ್ಕೆ ಕವಿತೆಯನ್ನು ಬಳಸಿಕೊಳ್ಳಲಾಗುತ್ತಿದೆ. ಕವಿತೆಯನ್ನು ವಿಮರ್ಶೆ ಮಾಡುವುದು ಹಾಗಲ್ಲ. ಕವಿತೆಯ ಕಡೆ ಓದುಗ ಹೊರಳುವಂತೆ ಮಾಡುವುದು ವಿಮರ್ಶೆಯ ಉದ್ದೇಶವಾಗಬೇಕು. ಕಾವ್ಯ ವ್ಯಾಖ್ಯಾನದ ಹೆಸರಿನಲ್ಲಿ ಅಧಿಕಪ್ರಸಂಗತನವೇ ಜಾಸ್ತಿಯಾಗುತ್ತಿದೆ. ಕಾವ್ಯವನ್ನು ಹರಿಕಥೆಯಂತೆ ಬಳಸುವವರು ಹೆಚ್ಚಾಗಿದ್ದಾರೆ ಎಂದು ಮೊನ್ನೆ ಮೊನ್ನೆ ಯು ಆರ್ ಅನಂತಮೂರ್ತಿ ಆಕ್ಷೇಪ ವ್ಯಕ್ತಪಡಿಸಿದ್ದರು.
ವಿಮರ್ಶೆಯನ್ನು ಓದಿ ಕಾವ್ಯವನ್ನು ಓದುವವರ ಸಂಖ್ಯೆ ಎಷ್ಟಿದೆಯೋ ಗೊತ್ತಿಲ್ಲ. ಹಾಗೇ, ಕವಿತೆಯನ್ನು ಒಂದು ಗಣಿತದ ಸೂತ್ರದಂತೆ ಅಧ್ಯಯನ ಮಾಡುವುದೋ, ಒಗಟೆಂದು ಭಾವಿಸಿ ಬಿಡಿಸಲೆತ್ನಿಸುವುದೋ ಅದೊಂದು ಅರ್ಥವಾಗದ ಕಗ್ಗ ಎಂದು ಬೇರೆಯವರ ಹತ್ತಿರ ಇದಕ್ಕೆ ಅರ್ಥವೇನು ಎಂದು ಕೇಳುವುದೋ ಕವಿತೆಯನ್ನು ಮೆಚ್ಚುವವರು ಮಾಡುವ ಕೆಲಸ ಅಲ್ಲ. ಅದೇ ಕಾರ್ಯಕ್ರಮದಲ್ಲಿ ಕಿ ರಂ ನಾಗರಾಜ್ ಹೇಳಿದ್ದು ನಿಜಕ್ಕೂ ಅರ್ಥವತ್ತಾಗಿತ್ತು. ಈ ಕವಿತೆ ಅರ್ಥವಾಗುವುದಿಲ್ಲ ಎಂದು ಯಾರಾದರೂ ಹೇಳಿದರೆ ಅವರು ಉತ್ತರಿಸುತ್ತಾರಂತೆ; ಅರ್ಥವಾದಷ್ಟೇ ಕವಿತೆ. ಅದು ಪೂರ್ತಿ ಅರ್ಥವಾಗಬೇಕು ಎನ್ನುವ ಆತುರ ಯಾಕೆ? ಯಾವತ್ತೋ ಒಂದು ದಿನ ಅರ್ಥವಾಗುತ್ತೆ ಬಿಡಿ. ಅರ್ಥವಾಗದಿದ್ದರೂ ಸರಿಯೇ. ಅರ್ಥವಾಗಲೇಬೇಕು ಅನ್ನುವ ಹಠ ಯಾಕೆ? ಅದೇ ಸರಿ. ಅರ್ಥವಾದಷ್ಟೇ ಅರ್ಥ. ಕವಿತೆ ಇನ್ನೊಬ್ಬರ ಹಾಗೆ ಅಂದುಕೊಂಡುಬಿಡೋಣ. ಜೊತೆಗಿದ್ದವರೂ ಅಷ್ಟೇ, ಎಷ್ಟು ಅರ್ಥವಾಗುತ್ತಾರೋ ಅಷ್ಟೇ. ಇನ್ನಷ್ಟು
ಇತ್ತೀಚಿನ ಟಿಪ್ಪಣಿಗಳು