ಹತ್ತು ಕಟ್ಟೋ ಬದಲು ಒಂದು ಮುತ್ತು ಕಟ್ಟಿದಂತೆ ’ಹನ್ನೊಂದನ್ನು’ ಬಳಸುವ ಬದಲು ನೆರವಾಗಿ ’ಪನ್ ಒಂದನ್ನು’ (ಶ್ಲೇಷೆ) ಬಳಸುವ ಮಾರ್ಗ ಕನ್ನಡದ ಕವಿ, ಲೇಖಕ, ಕನ್ನಡಾಂಗ್ಲ ಪನ್ ಡಿತರಿಗೆ ಹೊಸದೇನು ಅಲ್ಲ. ರನ್ನ, ಕುಮಾರವ್ಯಾಸ, ಕೈಲಾಸಂ, ಬೇಂದ್ರೆ, ನಾ.ಕಸ್ತೂರಿ, ವೈಯನ್ಕೆ, ಲಂಕೇಶ್, ಚಂಪಾ ಇದೀಗ ವಿಶ್ವೇಶ್ವರ ಭಟ್, ದುಂಡಿರಾಜ್, ನಾರಾಯಣ ರಾಯಚೂರು ಹೀಗೆ ಪುಂಖಾನುಪುಂSವಾಗಿ ಹೆಸರುಗಳು ಕೇಳಿಬರುತ್ತವೆ. ಇವರಲ್ಲಿ ಕೆಲವರು ಚದುರಿದಂತೆ ಪನ್ ಬಳಕೆ ಮಾಡಿದರೆ, ಕೆಲವರಂತೂ ವ್ಯಾಪಕವಾದ ವಿಶ್ಲೇಷಣೆಯ ಪನ್ಥಕ್ಕೆ ಸೇರಿದವರಾಗಿದ್ದಾರೆ.
ಹಲವು ಅರ್ಥಗಳುಳ್ಳ ಒಂದೇ ಪದವನ್ನು ಹಿಡಿದೋ, ಪದದ ಉಚ್ಚಾರಣೆ ಒಂದೆ ಆದರೂ, ಸಂದರ್ಭಕ್ಕೆ ತಕ್ಕಂತೆ ನಾನಾ ಅರ್ಥಗಳನ್ನು ಆರೋಪಿಸಿವ, ವಿವಿಧಾರ್ಥಗಳಿಂದ ಹೊಳೆಯಿಸುವ, ವಿಪರೀತ ಅರ್ಥಗಳನ್ನು ಪದಕ್ಕೆ ತಳುಕು ಹಾಕಿ, ಸಾಮಾನ್ಯ ಅರ್ಥವನ್ನು ತಳಕ್ಕೆ ಹಾಕಿ ಆಯಾ ಸಂದರ್ಭವನ್ನು ವಿಡಂಬಿಸುತ್ತಾ ಬೇರೊಂದು ಅರ್ಥವನ್ನು ತಳ ತಳಿಸುವಂತೆ ಮಾಡುವುದೆ- ಮಾಡಬೇಕಾದುದೇ ಶ್ಲೇಷೆಯ ಗುಣ-ಧರ್ಮ.
ಯಾವುದೇ ಪದವನ್ನು ಹಿಡಿದು ಪನ್ ಮಾಡಲು ಪ್ರಯತ್ನಿಸುವುದು ಪ್ರಾರಂಭಕ್ಕೆ ಹ್ಯಾ-ಬಿಟ್ ಆದರೂ, ಕ್ರಮೇಣ ಅರೆಕ್ಷಣ ಬಿಟ್ ಇರಲಾರದ ’ಸರ್ಚ್-ರೀಸರ್ಚ್’ ಕಸುಬೇ ಆಗಿ, ಪನ್ಸ್ಟರ್ ತನಗೆ ತಾನೇ ಪನ್ಜ(ಜ್ವ)ರದ ಪಕ್ಷಿಯಾಗಿ ಹೋಗುವುದು ಸಾಮಾನ್ಯ. ಅವನ ತಲೆಯಲ್ಲಿ ’ಇಟ್ ಕೀಪ್ಸ್ ಹ್ಯಾ-ಪನ್ನಿಂಗ್’ ಅಂದರೆ ಅಚ್ಚರಿಯಿಲ್ಲ. ಹಾಗೆಯೇ ಪನ್ಸ್ಟರ್ಗಳು ಇರುವ ಕಡೆ ’ಪನ್ಯೂಷನ್-ಫ್ರೀ’ ವಾತಾವರಣವೂ ಅಲಭ್ಯವೇ- ಅಹುದಾದರಹುದೆನ್ನಿ.
ಇತ್ತೀಚಿನ ಟಿಪ್ಪಣಿಗಳು